ಬೆಂಗಳೂರು: ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡಿ, ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕೇಂದ್ರ ಸರ್ಕಾರ (Central Government) ನಿರ್ಧಾರ ಒಂದು ಐತಿಹಾಸಿಕ ಕ್ರಮವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ (Murugesh Nirani) ಪ್ರಶಂಸಿದ್ದಾರೆ.

ಕೇಂದ್ರ ಸರ್ಕಾರ ಬಲವಾದ ಸಾಕ್ಷ್ಯಾಧಾರ ಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ. ಇದಕ್ಕಾಗಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ನಿರಾಣಿ ತಿಳಿಸಿದ್ದಾರೆ.

ಈ ಸಂಘಟನೆಗೆ ನಿಷೇಧ ಹೇರಬೇಕು ಎಂಬುದು ದಶಕಗಳ ಬೇಡಿಕೆಯಾಗಿತ್ತು. ಎಲ್ಲಿಯ ತನಕ ದೇಶದಲ್ಲಿ ಮೋದಿ ಅವರಂತಹ ಬಲಿಷ್ಟ ನಾಯಕ ಅಧಿಕಾರದಲ್ಲಿ ಇರುತ್ತಾರೋ ಅಲ್ಲಿಯ ತನಕ ಭಯೋತ್ಪಾದನೆ, ಭಯೋತ್ಪಾದಕರು, ಮೂಲಭೂತವಾದಿಗಳು ಸೇರಿದಂತೆ ಸಮಾಜಘಾತುಕ ಶಕ್ತಿಗಳಿಗೆ ದೇಶದಲ್ಲಿ ಉಳಿಗಾಲ ಇರುವುದಿಲ್ಲ ಎಂಬ ಸಂದೇಶ ರವಾನೆಯಾಗಿದೆ ಎಂದು ನಿರಾಣಿ ಅವರು ಎಚ್ಚರಿಸಿದ್ದಾರೆ.

ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಠೀಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ರಾಜಕಾರಣ ಮಾಡಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ.
